ಬೆಂಗಳೂರು: ನಿಮ್ಮ ಸರಕಾಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ಗೆ ಎಲ್ಲಿಂದ ಲಸಿಕೆ ತರುವುದು? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಡಿಯೂರಪ್ಪ ಅವರನ್ನು ಪ್ರಶ್ನಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ; “ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ ಮತ್ತೆ ಅವತರಿಸಿ ಕೇಕೆ ಹಾಕುತ್ತಿರುವ ಕೊರೊನಾ ವೈರಸ್” ಎಂದು ಟ್ವೀಟ್ ಮಾಡಿದ್ದಾರೆ.
“ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ, ಕೊರೊನ ನಿಯಂತ್ರಣಕ್ಕೆ ಸರಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಕೊರೊನ ಸೋಂಕು ಉಲ್ಬಣಗೊಳ್ಳುತ್ತಿದೆ?” ಎಂದು ಸಿದ್ದು ಪ್ರಶ್ನಿಸಿದ್ದಾರೆ.
ಕೊರೊನಾ ನಿರ್ವಹಣೆಗಾಗಿ 5,372 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಬಜೆಟ್ನಲ್ಲಿ ಹೇಳಿರುವ ಬಿಎಸ್ವೈ ಅವರು ಮಾಡಿರುವ ಖರ್ಚಿನ ವಿವರ ತಿಳಿಸಿಲ್ಲ. ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಿ ಎಂದು ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.
ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.