ಸೋಂಕು ನಿಯಂತ್ರಣಕ್ಕೆ ಕಾರ್ಯಪಡೆ ಸಮಿತಿ ತುರ್ತು ಸಭೆ ನಡೆಸಿದ ಜಿಲ್ಲಾಧಿಕಾರಿ ಆರ್.ಲತಾ; ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್, ಪ್ರಕರಣಗಳು ಹೆಚ್ಚಾದರೆ ಅಧಿಕಾರಿಗಳೇ ಹೊಣೆ ಎಂದ ಮೇಡಂ
M Krishnappa Chikkaballapura
ಚಿಕ್ಕಬಳ್ಳಾಪುರ: ರಾಜಧಾನಿ ಬೆಂಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಬಿಗಿ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
ಸೋಕಿತರು ಹೆಚ್ಚಾಗದಂತೆ ಮುನ್ನೆಚ್ಚರಿಕೆ ವಹಿಸುವುದು, ಕೋವಿಡ್ ಮಾರ್ಗಸೂಚಿ ಪಾಲನೆಯಾಗುವಂತೆ ನೋಡಿಕೊಳ್ಳುವುದು, ೪೫ ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಿಸುವುದು ಸೇರಿದಂತೆ ಹಲವು ಕ್ರಮಗಳ ಬಗ್ಗೆ ಜಿಲ್ಲಾಡಳಿತ ಎಲ್ಲ ಜಿಲ್ಲಾ ಮತ್ತು ತಾಲೂಕು ಮಟ್ಟದ ಆಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಜಿಲ್ಲೆಯ ಎಲ್ಲಾ ತಾಲೂಕುಗಳ ತಹಸೀಲ್ದಾರ್ʼಗಳು, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ನಗರಸಭೆ ಆಯುಕ್ತರು/ಮುಖ್ಯ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪಿಡಿಒಗಳು, ಸಿಡಿಪಿಓಗಳು ಹಾಗೂ ಇತರೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗುರುವಾರ ನಡೆದ ಜಿಲ್ಲಾ ಕೋವಿಡ್-19 ಲಸಿಕಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಆರ್.ಲತಾ ಅವರು, ಎಲ್ಲ ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನು ಕೊಟ್ಟರು.
ಕೊರೊನಾ ಎರಡನೇ ಅಲೆ ತುಂಬಾ ಗಂಭೀರವಾಗಿದೆ. ಜಿಲ್ಲೆಯಲ್ಲಿ ದಿನೆದಿನೇ ಪಾಸಿಟೀವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸೊಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಜತೆಗೆ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕಾ ಕೇಂದ್ರಕ್ಕೆ ಕರೆತಂದು ಲಸಿಕೆ ಹಾಕಿಸುವ ಕೆಲಸವನ್ನು ಆರೋಗ್ಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಸೋಂಕಿತರು ಹೆಚ್ಚಿದರೆ ಅಧಿಕಾರಿಗಳೇ ಹೊಣೆ
ಜಿಲ್ಲೆಯಲ್ಲಿ ಕೊರೊನಾ ಪಾಸಿಟೀವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತೀದಿನ 100 ಪಾಸಿಟೀವ್ ಪ್ರಕರಣಗಳು ದಾಖಲಾಗುತ್ತಿವೆ. ಚಿಕ್ಕಬಳ್ಳಾಪುರ, ಚಿಂತಾಮಣಿ ಹಾಗೂ ಗೌರಿಬಿದನೂರಿನಲ್ಲಿ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಹೀಗಾಗಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ನಿಯಂತ್ರಣ ವಿಷಯದಲ್ಲಿ ನಿರ್ಲಕ್ಷ ಮಾಡಬಾರದು. ಒಂದು ವೇಳೆ ನಿರ್ಲಕ್ಷ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಡಿಸಿ ಎಚ್ಚರಿಸಿದರು.
ಕೊರೊನಾ ಪಾಸಿಟೀವ್ ಬಂದವರನ್ನು ಕೂಡಲೇ ಕ್ವಾರಂಟೈನ್ಗೆ ಒಳಪಡಿಸಬೇಕು. ಪಾಸಿಟೀವ್ ಬಂದಿರುವ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿರುವ ಕನಿಷ್ಠ 20 ಮಂದಿಯನ್ನು ಗುರುತಿಸಿ ಅವರ ಗಂಟಲು ದ್ರವ ಪರೀಕ್ಷೆ ಮಾಡಿಸಬೇಕು. ಇದರ ಜೊತೆಗೆ ಎಲ್ಲಾ ತಾಲೂಕುಗಳಲ್ಲಿ ಆರ್ಟಿಪಿಸಿಆರ್ ಟೆಸ್ಟ್ಗಳು ಮತ್ತಷ್ಟು ಹೆಚ್ಚಾಗಬೇಕು. ಈ ಬಗ್ಗೆ ನಗರ ವ್ಯಾಪ್ತಿಯಲ್ಲಿ ಆಯಾ ನಗರಸಭೆಗಳ ಆಯುಕ್ತರು, ಗ್ರಾಮೀಣ ಭಾಗದಲ್ಲಿ ಆಯಾ ಪಂಚಾಯಿತಿ ಪಿಡಿಒಗಳು ಹೆಚ್ಚಿನ ಗಮನ ಕೊಡಬೇಕು. ಇದಕ್ಕಾಗಿ ಆಯಾ ಭಾಗದಲ್ಲಿ ಆರೋಗ್ಯ ಸಿಬ್ಬಂದಿಯನ್ನೊಳಗೊಂಡಂತೆ ಒಂದೊಂದು ವಾಟ್ಸಾಪ್ ಗ್ರೂಪ್ಗಳನ್ನು ಮಾಡಿ, ಮಾಹಿತಿ ಹಂಚಿಕೊಳ್ಳಬೇಕು. ಎಲ್ಲಾ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು. ಯಾರಿಗೆ ಕೊರೊನಾ ಪಾಸಿಟೀವ್ ಬಂದಿದೆಯೋ ಅವರನ್ನು ಕೂಡಲೇ ಕ್ವಾರಂಟೈನ್ಗೆ ಒಳಪಡಿಸಬೇಕು. ಆರೋಗ್ಯ ಸಿಬ್ಬಂದಿ ಹೋಂ ಕ್ವಾರಂಟೈನ್ನಲ್ಲಿರುವವರ ಮನೆಗೆ ನಿತ್ಯವೂ ತೆರಳಿ ಅವರಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡಬೇಕು. ಇದಕ್ಕೂ ಪ್ರತ್ಯೇಕ ತಂಡಗಳನ್ನು ರಚಿಸಬೇಕು ಎಂದು ಎಲ್ಲಾ ತಹಸೀಲ್ದಾರ್ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಲಸಿಕೆ ಅಭಿಯಾನ ತೀವ್ರಕ್ಕೆ ಸೂಚನೆ
ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಲಸಿಕೆ ಅಭಿಯಾನ ಆಗುತ್ತಿಲ್ಲ. ಸರಕಾರ ಪ್ರತಿನಿತ್ಯ 45 ವರ್ಷ ಮೇಲ್ಪಟ್ಟ ಕನಿಷ್ಠ 10,500 ಮಂದಿಗೆ ಲಸಿಕೆ ಹಾಕಬೇಕು ಎಂದು ಗುರಿ ನಿಗದಿಪಡಿಸಿದೆ. ಆದರೆ, ಪ್ರಸ್ತುತ 3,೦೦೦ ಜನಕ್ಕೂ ಲಸಿಕೆ ಹಾಕಲಾಗುತ್ತಿಲ್ಲ. ಜಿಲ್ಲೆಯಲ್ಲಿ ಪ್ರಸ್ತುತ 30,000 ಮಂದಿಗೆ ಸಾಕಾಗುವಷ್ಟು ಲಸಿಕೆ ಲಭ್ಯವಿದೆ. ಇನ್ನೂ 20,000 ಮಂದಿಗೆ ಬೇಕಾಗುವಷ್ಟು ಲಸಿಕೆ ಶುಕ್ರವಾರ ಸಂಜೆಯೊಳಗೆ ಬರಲಿದೆ. ಆದರೆ, ಲಸಿಕೆ ಮಾತ್ರ ಆಗುತ್ತಿಲ್ಲ. ಜಿಲ್ಲೆಯಾದ್ಯಂತ ಸುಮಾರು 3 ಲಕ್ಷ ಮಂದಿ 45 ವರ್ಷ ಮೇಲ್ಪಟ್ಟವರು ಇದ್ದು, ಈ ಪೈಕಿ ಈವರೆಗೆ 1.30 ಲಕ್ಷ ಜನರಿಗೆ ಕೊರೊನಾ ಲಸಿಕೆ ಹಾಕಲಾಗಿದ್ದು, ಇನ್ನೂ ಶೇ.60 ಮಂದಿ ಲಸಿಕೆ ಹಾಕಿಸಿಕೊಳ್ಳಬೇಕಿದೆ. ಇವರನ್ನು ಮೊದಲು ಗುರುತಿಸಿ ಲಸಿಕೆ ಹಾಕಬೇಕು. ಇದರಲ್ಲಿ ಯಾವುದೇ ರೀತಿಯ ಉದಾಸೀನ ಮಾಡಬಾರದು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಮಾತನಾಡಿ, “ಗ್ರಾಮೀಣ ಭಾಗದಲ್ಲಿ ಕೊರೊನಾ ನಿಯಂತ್ರಣದಲ್ಲಿ ಗ್ರಾಮ ಪಂಚಾಯಿತಿ ಪಿಡಿಒಗಳ ಪಾತ್ರ ಮುಖ್ಯವಾಗಿದ್ದು, ಸಾರ್ವಜನಿಕರಿಗೆ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಹೇಳಬೇಕು. ಪಂಚಾಯಿತಿ ವ್ಯಾಪ್ತಿಗೆ ಬರುವ ಹಳ್ಳಿಗಳಲ್ಲಿ 45 ವರ್ಷ ಮೇಲ್ಪಟ್ಟವರನ್ನು ಗುರುತಿಸಿ ಅವರಿಗೆ ಲಸಿಕೆ ಹಾಕಿಸಬೇಕು. ಇದಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು, ಶಾಲಾ ಶಿಕ್ಷಕರ ಸಹಕಾರ ಪಡೆದುಕೊಳ್ಳಬಹುದು” ಎಂದರು.
ಮಾರ್ಗಸೂಚಿ ಪಾಲಿಸದಿದ್ದರೆ ಕ್ರಮ
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, “ಜಿಲ್ಲೆಯಲ್ಲಿ ಸಾರ್ವಜನಿಕರು ಕೊರೊನಾ ಬಗ್ಗೆ ನಿರ್ಲಕ್ಷ ತೋರುತ್ತಿದ್ದು, ನಿಯಂತ್ರಣ ಕ್ರಮಗಳನ್ನು ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮಾಸ್ಕ್ ಧರಿಸದೇ ಇರುವವರಿಗೆ ಮುಲಾಜಿಲ್ಲದೆ ದಂಡ ವಿಧಿಸಬೇಕು. ಗ್ರಾಮೀಣ ಭಾಗದಲ್ಲಿ ಪಿಡಿಒಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸಬೇಕು. ಜಿಲ್ಲೆಯಲ್ಲಿ ಎಲ್ಲೂ ಕೂಡ ಜಾತ್ರೆ ಉತ್ಸವಗಳಿಗೆ ಅವಕಾಶ ನೀಡಬಾರದು. ಕೊರೊನಾ ನಿಯಂತ್ರಣಕ್ಕಾಗಿ ಪ್ರತಿ ತಾಲೂಕುವಾರು ನೇಮಿಸಿರುವ ನೋಡಲ್ ಅಧಿಕಾರಿಗಳು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು. ಮುಸ್ಲಿಂ ಸಮುದಾಯದವರು ಮುಂಬರುವ ರಂಜಾನ್ ಹಬ್ಬ ಆಚರಣೆಗೆ ಸರಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಯಲ್ಲಾ ರಮೇಶ್ಬಾಬು, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಚನ್ನಕೇಶವರೆಡ್ಡಿ, ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.